ಬೆಳಗಾವಿಯ ಶಿವಂ ಅಸೋಸಿಯೇಟ್ ಕಂಪನಿಯು ಸಾವಿರಾರು ಕೋಟಿ ರೂಪಾಯಿ ವಂಚನೆ ಎಸಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಮಹತ್ವದ ಮಾಹಿತಿ ಬಹಿರಂಗಪಡಿಸಿದೆ. ಹೆಚ್ಚಿನ ಲಾಭದ ಆಮಿಷವೊಡ್ಡಿ 2,400 ಕೋಟಿ ಸಂಗ್ರಹಿಸಿ, ಹೊಸಬರ ಹಣವನ್ನು ಹಳಬರಿಗೆ ಬಡ್ಡಿಯಾಗಿ ನೀಡುತ್ತಿದ್ದ ವಂಚನೆಯ ರಹಸ್ಯವನ್ನು ಸಿಐಡಿ ಡಿಐಜಿಪಿ ಭೀಮಾಶಂಕರ್ ಗುಳೇದ್ ಎಳೆ ಎಳೆಯಾಗಿ ಬಿಚ್ಚಿಟ್ಟಿದ್ದಾರೆ.
ಇಂದು ಬೆಳಗಾವಿಯಲ್ಲಿ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಅವರು, ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಎಫ್ಐಆರ್ ದಾಖಲಾಗಿ ಮಾಲೀಕನನ್ನು ಬಂಧಿಸಲಾಗಿದ್ದರೂ, ಸಾರ್ವಜನಿಕರು ಇಂದಿಗೂ ಈ ಸಂಸ್ಥೆಗೆ ಕೋಟ್ಯಂತರ ರೂಪಾಯಿ ಹಣ ಹೂಡಿಕೆ ಮಾಡುತ್ತಿರುವುದು ಬೆಳಕಿಗೆ ಬಂದಿದ್ದು ಜನರಲ್ಲಿ ಜಾಗೃತಿ ಮೂಡಿಸಲು ಅಧಿಕಾರಿಗಳು ಈ ಸುದ್ದಿಗೋಷ್ಠಿ ಮಾಡುತ್ತಿದ್ದೇವೆ ಎಂದು ಅವರು ತಿಳಿಸಿದರು.
